ಚಂಡಿಗಢ: ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದ್ದವರನ್ನು ಸೆರೆ ಹಿಡಿಯುವ ಕಾರ್ಯಾಚರಣೆಯಲ್ಲಿಹಿರಿಯ ಪೊಲೀಸ್ ಅಧಿಕಾರಿ ಮೇಲೆ ಟ್ರಕ್ ಹರಿಸಿ ಭೀಕರ ಹತ್ಯೆ ಮಾಡಿರುವ ಘಟನೆ ಹರಿಯಾಣದಲ್ಲಿ ನಡೆದಿದೆ.
ಸುರೇಂದ್ರ ಸಿಂಗ್ ಗಣಿ ಮಾಫಿಯಾಗೆ ಬಲಿಯಾದ ಹಿರಿಯ ಪೊಲೀಸ್ ಅಧಿಕಾರಿ.
ಅಕ್ರಮ ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಮಾಹಿತಿ ಪಡೆದಿದ್ದ ಸುರೇಂದ್ರ ಸಿಂಗ್ ತನ್ನ ತಂಡದೊಂದಿಗೆ ಇಂದು ಬೆಳಗ್ಗೆ 11.30ಕ್ಕೆ ಸ್ಥಳಕ್ಕೆ ತಲುಪಿದ್ದರು.
ಪೊಲೀಸ್ ಸಿಬ್ಬಂದಿಯನ್ನು ಕಂಡ ಕೂಡಲೇ ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದ್ದವರು ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದಾರೆ. ಇದೇ ವೇಳೆ ದಾರಿಯಲ್ಲಿ ನಿಂತ ಅಧಿಕಾರಿ ಸುರೇಂದ್ರ ಸಿಂಗ್ ಕಲ್ಲು ತುಂಬಿದ ವಾಹನಗಳನ್ನು ನಿಲ್ಲಿಸುವಂತೆ ಸೂಚಿಸಿದರು. ಆದರೆ ಟ್ರಕ್ ಚಾಲಕ ಆತನ ಮೇಲೆ ಟ್ರಕ್ ಹರಿಸಿದ್ದರಿಂದ ಪೊಲೀಸ್ ಅಧಿಕಾರಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನಿಬ್ಬರು ರಸ್ತೆಯಿಂದ ಪಕ್ಕಕ್ಕೆ ಜಿಗಿದು ಪ್ರಾಣ ರಕ್ಷಿಸಿಕೊಂಡಿದ್ದಾರೆ. ಘಟನೆ ಬಳಿಕ ಆರೊಪಿಗಳು ಪರಾರಿಯಾಗಿದ್ದಾರೆ.
ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಆರೋಪಿಗಳನ್ನು ಪತ್ತೆ ಹಚ್ಚಲು ಆದೇಶಿಸಿದ್ದು, ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. ಅಲ್ಲದೇ ಪೊಲೀಸ್ ಅಧಿಕಾರಿ ಸಾವಿಗೆ ದುಃಖ ವ್ಯಕ್ತಪಡಿಸಿದ್ದಾರೆ.
ಇದೊಂದು ಆಘಾತಕಾರಿ ಘಟನೆಯಾಗಿದ್ದು, ಗಣಿಗಾರಿಕೆ ಮಾಫಿಯಾವನ್ನು ಬಿಡುವುದಿಲ್ಲ, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತೇವೆ ಯಾರನ್ನೂ ಬಿಡುವುದಿಲ್ಲ ಎಂದು ಗೃಹ ಸಚಿವ ಅನಿಲ್ ವಿಜ್ ಹೇಳಿದ್ದಾರೆ.
2009ರ ಹಿಂದಿನ ಸುಪ್ರೀಂಕೋರ್ಟ್ ನಿಷೇಧದ ಆದೇಶದ ಹೊರತಾಗಿಯೂ ಅರಾವಳಿ ಪ್ರದೇಶದ ಹಲವಾರು ಸ್ಥಳಗಳಲ್ಲಿ ಗಣಿಗಾರಿಕೆ ಅವ್ಯಾಹತವಾಗಿ ಮುಂದುವರಿದಿದೆ. ಈ ಪ್ರದೇಶದಲ್ಲಿ 16 ಸ್ಥಳಗಳಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ ಎಂದು ಇಲ್ಲಿನ ನಾಗರಿಕರ ಗುಂಪೊಂದು ಆರೋಪಿಸಿತ್ತು