ಉಡುಪಿ, ಏಪ್ರಿಲ್ 25: ಕರ್ನಾಟಕ ಪರವಾನಗಿ ಭೂಮಾಪಕರ ಅನಿರ್ಧಿಷ್ಟಾವಧಿ ಮುಷ್ಕರದಿಂದ ಸಾರ್ವಜನಿಕ ಸೇವೆಗಳು ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದ್ದು, ಜನಸಾಮಾನ್ಯರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ತುಳುನಾಡ ರಕ್ಷಣಾ ವೇದಿಕೆ ಉಡುಪಿ ನಿಯೋಗ ಜಿಲ್ಲಾಧಿಕಾರಿಗಳನ್ನು ಭೇಟಿ ನೀಡಿ ಆಕ್ರೋಶ ವ್ಯಕ್ತಪಡಿಸಿದೆ.
ಕಳೆದ ಮಾರ್ಚ್ 1ರಿಂದ ಆರಂಭವಾದ ಈ ಮುಷ್ಕರದಲ್ಲಿ ಭೂಮಾಪಕರು ತಮ್ಮ ಬೇಡಿಕೆಗಳಾದ ವಿಶೇಷ ನೇಮಕಾತಿ ಅಡಿಯಲ್ಲಿ ಶಾಶ್ವತಗೊಳಿಸುವುದು ಅಥವಾ ಸಮಾನ ವೇತನ ನೀಡುವಂತೆ ಆಗ್ರಹಿಸಿ ಹೋರಾಟ ನಡೆಸುತ್ತಿದ್ದಾರೆ. ಆದರೆ, ಇದರ ಪರಿಣಾಮವಾಗಿ ಜನಸಾಮಾನ್ಯರ ದೈನಂದಿನ ಜೀವನಕ್ಕೆ ಅಗತ್ಯವಾದ ಅನೇಕ ಸೇವೆಗಳು ವಿಳಂಬಗೊಳ್ಳುತ್ತಿವೆ.
ಜಿಲ್ಲೆಯಲ್ಲಿ ಈ ತಿಂಗಳಲ್ಲಿ ಮಾತ್ರವೇ ಸುಮಾರು 15,000 ರಿಂದ 16,000 ಅರ್ಜಿಗಳು ಬಾಕಿ ಉಳಿದಿದ್ದು, ರಾಜ್ಯ ಮಟ್ಟದಲ್ಲಿ ಈ ಸಂಖ್ಯೆ ಸುಮಾರು 6 ಲಕ್ಷಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ. ಭೂಮಿ ದಾಖಲೆ, ಹೆಸರು ಬದಲಾವಣೆ, ಹಕ್ಕುಪತ್ರ ವಿತರಣೆ ಸೇರಿದಂತೆ ಅನೇಕ ಪ್ರಮುಖ ಸೇವೆಗಳು ತಡವಾಗುತ್ತಿದ್ದು, ಜನರು ಹಲವು ಬಾರಿ ಕಚೇರಿಗಳಿಗೆ ಭೇಟಿ ನೀಡಬೇಕಾದ ಅನಿವಾರ್ಯತೆ ಎದುರಿಸುತ್ತಿದ್ದಾರೆ.
ಸಿಬ್ಬಂದಿ ಕೊರತೆ ಮತ್ತು ಆಡಳಿತಾತ್ಮಕ ಅಸಮರ್ಪಕತೆಯಿಂದಾಗಿ ಕಚೇರಿಗಳಲ್ಲಿ ಕೆಲಸಗಳು ಸರಿಯಾಗಿ ನಡೆಯುತ್ತಿಲ್ಲ. ಇದರಿಂದ ಸಾರ್ವಜನಿಕರಲ್ಲಿ ಅಸಮಾಧಾನ ಹೆಚ್ಚುತ್ತಿದ್ದು, ಸರ್ಕಾರದ ಸೇವೆಗಳ ಮೇಲೆ ವಿಶ್ವಾಸ ಕುಸಿಯುವ ಪರಿಸ್ಥಿತಿ ನಿರ್ಮಾಣವಾಗಿದೆ.
ಈ ಹಿನ್ನೆಲೆಯಲ್ಲಿ ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಿ, ತಕ್ಷಣವೇ ಈ ಸಮಸ್ಯೆಗೆ ಪರಿಹಾರ ಕಂಡುಹಿಡಿಯುವಂತೆ ಒತ್ತಾಯಿಸಲಾಯಿತು. ಸರ್ಕಾರವು ಭೂಮಾಪಕರ ಬೇಡಿಕೆಗಳ ಕುರಿತು ಸೂಕ್ತ ನಿರ್ಧಾರ ಕೈಗೊಂಡು, ಅಗತ್ಯ ಸಿಬ್ಬಂದಿ ನೇಮಕಾತಿ ಮೂಲಕ ಸಾರ್ವಜನಿಕ ಸೇವೆಗಳನ್ನು ಸುಧಾರಿಸಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಜನರ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ತ್ವರಿತ ಕ್ರಮ ಕೈಗೊಳ್ಳುವುದು ಅಗತ್ಯವಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕೆಂದು ಸಂಘಟನೆ ಒತ್ತಾಯಿಸಿದೆ.
ನಿಯೋಗದಲ್ಲಿ ತುಳುನಾಡ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಫ್ರಾಂಕಿ ಡಿಸೋಜ ಕೊಳಲಗಿರಿ, ಜಿಲ್ಲಾ ಉಪಾಧ್ಯಕ್ಷ ಉಮೇಶ್ ಶೆಟ್ಟಿ, ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ಜಯ ಪೂಜಾರಿ (ಲಕ್ಷ್ಮೀನಗರ), ಪ್ರಧಾನ ಕಾರ್ಯದರ್ಶಿ ಸುರೇಂದ್ರ ಪೂಜಾರಿ ಹಾವಂಜೆ ಹಾಗೂ ಮುಖಂಡರಾದ ಮಮತಾ ಎನ್., ಶಂಕರ್, ಗುಣಾಕರ್ ಬೈರಂಪಳ್ಳಿ, ಸುಧೀಪ್ ಬೆಳ್ಳಾರ್ಪಾಡಿ, ಸಾಥ್ವಿಕ್ ಬೆಳ್ಳಾರ್ಪಾಡಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.





