ಅಮ್ಮುಂಜೆ, ಸೆ.5: ಅಮ್ಮುಂಜೆಯ ಸೆಕ್ರೇಡ್ ಹಾರ್ಟ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೆ.5ರಂದು ಶಿಕ್ಷಕರ ದಿನಾಚರಣೆಯನ್ನು ವಿದ್ಯಾರ್ಥಿಗಳ ನೇತೃತ್ವದಲ್ಲಿ ಅರ್ಥಪೂರ್ಣವಾಗಿ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ತುಳುನಾಡ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ಅಧ್ಯಕ್ಷರು, ಸಮಾಜ ಸೇವಕರು ಹಾಗೂ ಶಾಲೆಯ ಉಳಿವಿಗಾಗಿ ಹೋರಾಟ ನಡೆಸಿದ ಫ್ರ್ಯಾಂಕಿ ಡಿಸೋಜ ಕೊಳಲಗಿರಿ ಅವರು ಆಗಮಿಸಿ, ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಶಾಲೆಯಲ್ಲಿ ಸೇವೆ ಸಲ್ಲಿಸಿದ ಗೌರವ ಶಿಕ್ಷಕಿಯರಾದ ಉಷಾ, ಮಮತಾ, ಸುಜಾತಾ ಹಾಗೂ ಸಂಗೀತ ಅವರನ್ನು ಮುಖ್ಯ ಅತಿಥಿ ಫ್ರ್ಯಾಂಕಿ ಡಿಸೋಜ ಕೊಳಲಗಿರಿ ಅವರು ಉಡುಗೊರೆ ನೀಡಿ ಗೌರವಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಗೌರವ ಶಿಕ್ಷಕಿ ಉಷಾ ವಹಿಸಿದ್ದರು. ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಆಶಾ ಉಪಸ್ಥಿತರಿದ್ದರು.





ಕಾರ್ಯಕ್ರಮದ ಆರಂಭದಲ್ಲಿ 6ನೇ ಮತ್ತು 7ನೇ ತರಗತಿ ವಿದ್ಯಾರ್ಥಿಗಳಿಂದ ಪ್ರಾರ್ಥನೆ ನೆರವೇರಿತು. ಬಳಿಕ ಮುಖ್ಯ ಅತಿಥಿಗಳು ಹಾಗೂ ಶಿಕ್ಷಕ ವೃಂದದವರು ದೀಪ ಬೆಳಗಿಸಿದರು. ಕಾರ್ಯಕ್ರಮವನ್ನು ವಿದ್ಯಾರ್ಥಿ ಮೋಕ್ಷ ನಿರೂಪಿಸಿದರು. ವಿದ್ಯಾರ್ಥಿ ತರುಣ್ ಸ್ವಾಗತಿಸಿದರು.
ಮುಖ್ಯ ಅತಿಥಿ ಫ್ರ್ಯಾಂಕಿ ಡಿಸೋಜ ಕೊಳಲಗಿರಿ ಅವರು ಶಿಕ್ಷಕರ ದಿನಾಚರಣೆಯ ಮಹತ್ವ, ವಿದ್ಯಾರ್ಥಿಗಳ ಜೀವನದಲ್ಲಿ ಶಿಕ್ಷಕರ ಪಾತ್ರ ಹಾಗೂ ಶಿಕ್ಷಣದ ಮಹತ್ವದ ಕುರಿತು ಮಾತನಾಡಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಇದೇ ಸಂದರ್ಭದಲ್ಲಿ ಶಾಲೆಯ ಉಳಿವಿಗಾಗಿ ನಡೆಸಿದ ಹೋರಾಟದ ಸಂದರ್ಭಗಳನ್ನು ಸ್ಮರಿಸಿ, ಶಾಲೆಯ ಶೈಕ್ಷಣಿಕ ಬೆಳವಣಿಗೆಗೆ ಎಲ್ಲರೂ ಸಹಕಾರ ನೀಡಬೇಕು ಎಂದು ಕರೆ ನೀಡಿದರು.
ವಿದ್ಯಾರ್ಥಿಗಳ ಪರವಾಗಿ 6ನೇ ತರಗತಿಯ ನಿಶಾಂತ್ ಶಿಕ್ಷಕರ ದಿನಾಚರಣೆಯ ಕುರಿತು ಭಾಷಣ ಮಾಡಿದರು. ಕಾರ್ಯಕ್ರಮದ ಕೊನೆಯಲ್ಲಿ 7ನೇ ತರಗತಿಯ ವಿದ್ಯಾರ್ಥಿ ಪೃಥಮ್ ವಂದನಾರ್ಪಣೆ ಸಲ್ಲಿಸಿದರು.

ಶಿಕ್ಷಕರಿಗೆ ಗೌರವ ಸಲ್ಲಿಸುವ ಮೂಲಕ ವಿದ್ಯಾರ್ಥಿಗಳು ಆಯೋಜಿಸಿದ ಈ ಕಾರ್ಯಕ್ರಮವು ಶಿಕ್ಷಕರ ಮೇಲಿನ ಕೃತಜ್ಞತೆ ಮತ್ತು ಗೌರವವನ್ನು ವ್ಯಕ್ತಪಡಿಸುವಂತಿತ್ತು. ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿದ ವಿದ್ಯಾರ್ಥಿಗಳಿಗೆ ಹಾಗೂ ಸಹಕರಿಸಿದ ಎಲ್ಲರಿಗೂ ಶಾಲೆಯ ಪರವಾಗಿ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಲಾಯಿತು.

