ಕೊಲ್ಕತ್ತಾ, ಮೇ 07: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ Suvendu Adhikari ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ ಹತ್ಯೆ ಪ್ರಕರಣ ರಾಜ್ಯ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಈ ಘಟನೆ “ಪೂರ್ವಯೋಜಿತ ಹಾಗೂ ತಣ್ಣನೆಯ ರಕ್ತದ ಕೊಲೆ” ಎಂದು ಸುವೇಂದು ಅಧಿಕಾರಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉತ್ತರ 24 ಪರಗಣ ಜಿಲ್ಲೆಯ Madhyamgram ಪ್ರದೇಶದಲ್ಲಿ ಬುಧವಾರ ರಾತ್ರಿ ಈ ದಾಳಿ ನಡೆದಿದ್ದು, ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಸಮೀಪದಿಂದಲೇ ಚಂದ್ರನಾಥ್ ರಥ್ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಆಸ್ಪತ್ರೆ ಹೊರಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸುವೇಂದು ಅಧಿಕಾರಿ, “ಇದು ಸಾಮಾನ್ಯ ದಾಳಿ ಅಲ್ಲ. ದಾಳಿಕೋರರು ಎರಡು ರಿಂದ ಮೂರು ದಿನಗಳ ಕಾಲ ಹಿಂಬಾಲಿಸಿ, ಯೋಜಿತವಾಗಿ ಈ ಕೃತ್ಯ ಎಸಗಿದ್ದಾರೆ ಎಂಬ ಮಾಹಿತಿ ದೊರೆತಿದೆ,” ಎಂದು ಹೇಳಿದರು.
ಪ್ರಾಥಮಿಕ ತನಿಖೆಯ ಪ್ರಕಾರ, ಚಂದ್ರನಾಥ್ ರಥ್ ಪ್ರಯಾಣಿಸುತ್ತಿದ್ದ ಮಹೀಂದ್ರ ಸ್ಕಾರ್ಪಿಯೋ ವಾಹನವನ್ನು ದುಷ್ಕರ್ಮಿಗಳು ಕಾರು ಮತ್ತು ಬೈಕ್ ಮೂಲಕ ಹಿಂಬಾಲಿಸಿದ್ದರು. ಬಳಿಕ ಒಂದು ಕಾರಿನ ಮೂಲಕ ವಾಹನದ ದಾರಿ ತಡೆದು, ಬೈಕ್ ಸವಾರರು ಕಾರಿನ ಕಿಟಕಿಯ ಮೂಲಕ ಗುಂಡು ಹಾರಿಸಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.
ದಾಳಿಯಲ್ಲಿ ವಾಹನ ಚಾಲಕರಿಗೂ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಘಟನಾ ಸ್ಥಳದಿಂದ ಪೊಲೀಸರು ಜೀವಂತ ಗುಂಡುಗಳು ಹಾಗೂ ಖಾಲಿ ಕಾರ್ತೂಸ್ಗಳನ್ನು ವಶಪಡಿಸಿಕೊಂಡಿದ್ದಾರೆ. ದಾಳಿಗೆ ಬಳಸಿದ ನಿಸ್ಸಾನ್ ಮೈಕ್ರಾ ಕಾರಿನ ನಂಬರ್ ಪ್ಲೇಟ್ ನಕಲಿ ಎಂಬುದು ತನಿಖೆಯಲ್ಲಿ ಬಹಿರಂಗವಾಗಿದೆ.
ಚಂದ್ರನಾಥ್ ರಥ್ ಭಾರತೀಯ ವಾಯುಪಡೆಯ ಮಾಜಿ ಸಿಬ್ಬಂದಿಯಾಗಿದ್ದು, ಸುಮಾರು ಎರಡು ದಶಕಗಳ ಕಾಲ ಸೇವೆ ಸಲ್ಲಿಸಿದ್ದರು. ಬಳಿಕ ರಾಜಕೀಯ ಕ್ಷೇತ್ರಕ್ಕೆ ಪ್ರವೇಶಿಸಿ ಸುವೇಂದು ಅಧಿಕಾರಿ ಅವರ ಆಪ್ತ ವಲಯದಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿದ್ದರು.
ಈ ಪ್ರಕರಣದ ಕುರಿತು ಪಶ್ಚಿಮ ಬಂಗಾಳ ಡಿಜಿಪಿ ಸಮಗ್ರ ತನಿಖೆಯ ಭರವಸೆ ನೀಡಿದ್ದು, ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.




