ಬಂಟ್ವಾಳ: ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿ ಎಂಬಲ್ಲಿ ಇಂದು ಬುಧವಾರ ಬಜರಂಗದಳ ಮತ್ತು ಬಿಜೆಪಿ ಕಾರ್ಯಕರ್ತರ ಮೇಲೆ ತಲವಾರು ದಾಳಿ ನಡೆದಿದೆ. ಪೆರಾಜೆ ಬಜರಂಗದಳ ಸಂಚಾಲಕ ಮಹೇಂದ್ರ ಹಾಗೂ ಬಿಜೆಪಿ ಕಾರ್ಯಕರ್ತ ಪ್ರಶಾಂತ್ ನಾಯ್ಕ್ ಮೇಲೆ ತಲವಾರಿನಿಂದ ಮಾರಣಾಂತಿಕ ಹಲ್ಲೆ ನಡೆದಿದೆ. ಕಾಲು ಮತ್ತು ತಲೆಯ ಭಾಗಕ್ಕೆ ಗಂಭೀರ ಗಾಯಗಳಾಗಿದ್ದು, ಮಾರಣಾಂತಿಕ ಹಲ್ಲೆಗೊಳಗಾದ ಇಬ್ಬರು ಯುವಕರು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಣಿ ಜಂಕ್ಷನ್ ನಲ್ಲಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ವೇಳೆ ಒಮ್ನಿ ಕಾರಿನಲ್ಲಿ ಬಂದ ತಂಡ ಸ್ಕೂಟರ್ ಗೆ ಡಿಕ್ಕಿ ಹೊಡೆದು ಕೃತ್ಯ ಎಸಗಿದೆ. ಮಂಗಳೂರು ನಿವಾಸಿ ರಾಕೇಶ್, ಮಾಣಿ ಮಂಜುನಾಥ್ ಯಾನೆ ಮಂಜು ಹಾಗೂ ಪ್ರವೀಣ್ ನಾಯ್ಕ್ ಯಾನೆ ಮಾಹಲಿಂಗ ಮತ್ತಿತರ ತಂಡ ಹಲ್ಲೆ ನಡೆಸಿದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ವಿಟ್ಲ ಪೋಲೀಸರ ತಂಡ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ. ಇನ್ನು ಘಟನೆ ಬಗ್ಗೆ ಸ್ಪಷ್ಟನೆ ನೀಡಿರುವ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ತಲವಾರುಗಳಿಂದ ದಾಳಿಯಾಗಿಲ್ಲ, ಕಟ್ಟಿಗೆಯಿಂದ ಹಲ್ಲೆ ನಡೆಸಲಾಗಿದ್ದು ಈ ಬಗ್ಗೆ ತನಿಖೆ ಆರಂಭವಾಗಿದೆ ಎಂದಿದ್ದಾರೆ. ಚುನಾವಣಾ ಫಲಿತಾಂಶದ ದಿನ ಬಂಟ್ವಾಳ ಶಾಸಕರ ಗೆಲುವಿನ ಹರ್ಷ ಆಚರಣೆ ವೇಳೆ ಪಟಾಕಿ ಸಿಡಿಸಿ ಸಂಭ್ರಮ ಮಾಡುವ ವೇಳೆ ಇದೇ ತಂಡಗಳ ಮಧ್ಯೆ ಗಲಾಟೆ ನಡೆದಿತ್ತು ಎನ್ನಲಾಗಿದೆ.
©2021 Tulunada Surya | Developed by CuriousLabs