ಉಡುಪಿ: ಮಲ್ಪೆ ಸೀವಾಕ್ ಹಾಗೂ ಬೀಚ್ನಿಂದ ಸೈಂಟ್ ಮೇರೀಸ್ ದ್ವೀಪಕ್ಕೆ ಪ್ರವಾಸಿಗರನ್ನು ಕರೆದೊಯ್ಯುವ ಪ್ರವಾಸಿ ಬೋಟುಗಳಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚು ಜನರನ್ನು ತುಂಬಿಸುವ ಹಾಗೂ ಪ್ರಯಾಣಿಕರಿಗೆ ಸೂಕ್ತ ರೀತಿಯ ಲೈಫ್ ಜಾಕೆಟ್ಗಳನ್ನು ಧರಿಸಲು ನೀಡದೇ ಕರೆದೊಯ್ಯುತ್ತಿರುವ ಬಗ್ಗೆ ದೂರುಗಳು ಕೇಳಿ ಬಂದಿವೆ. ಇದರ ಗುತ್ತಿಗೆ ಹೊಂದಿರುವ ಗುತ್ತಿಗೆದಾರರಿಗೆ ಈ ಕೂಡಲೇ ನೋಟೀಸ್ ನೀಡಿ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಲ್ಪೆ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಮಲ್ಪೆ ಬೀಚ್ನಲ್ಲಿ ಹಾಗೂ ಸೈಂಟ್ ಮೇರೀಸ್ ಐ-ಲ್ಯಾಂಡ್ನಲ್ಲಿ ಹೊರಗಿ ನಿಂದ ಬರುವ ಪ್ರವಾಸಿಗರಿಗೆ ನೀರಿನ ಆಳ ಹಾಗೂ ಬಲದ ಅರಿವಿರುವುದಿಲ್ಲ, ಹೀಗಾಗಿ ಸುರಕ್ಷತೆ ಬಗ್ಗೆ ಸರಿಯಾದ ಮಾಹಿತಿ ಇಲ್ಲದ ಕಾರಣ ಕಳೆದ ಸಾಲಿನಲ್ಲಿ ಅನೇಕ ಜನರು ನೀರಿನಲ್ಲಿ ಆಡುವಾಗ ಮುಳುಗಿ ಮೃತರಾಗಿರುವ ಪ್ರಕರಣಗಳು ವರದಿಯಾಗಿವೆ. ಇವುಗಳು ಮುಂದಿನ ದಿನಗಳಲ್ಲಿ ಮರುಕಳಿಸದಂತೆ ಎಚ್ಚರಿಕೆ ಫಲಕಗಳನ್ನು ಅಳವಡಿಸುವುದರ ಜೊತೆಗೆ ಜೀವ ರಕ್ಷಕ ಸಿಬ್ಬಂದಿಗಳಿಗೆ ಹೆಚ್ಚಿನ ರೀತಿಯಲ್ಲಿ ಪ್ರವಾಸಿಗರ ಸುರಕ್ಷತೆ ಕುರಿತು ತರಬೇತಿ ನೀಡಿ, ನಿಯೋಜಿಸಬೇಕು ಎಂದು ನಿರ್ದೇಶನ ನೀಡಿದರು. ಈಗಾಗಲೇ ಸಮುದ್ರ ತೀರದಲ್ಲಿ ಪ್ರವಾಸಿಗರು ನೀರಿನ ಸೆಳೆತಕ್ಕೆ ಸಿಲುಕಿದಾಗ ಅವರ ರಕ್ಷಣೆಗೆ ಬಳಸುವ ಜೆಟ್ ಬೋಟುಗಳನ್ನು ದುರಸ್ಥಿ ಮಾಡುವು ದರೊಂದಿಗೆ ಸುಸ್ಥಿತಿಯಲ್ಲಿಟ್ಟುಕೊಂಡು ಅವಘಡಗಳು ಸಂಭವಿಸಿದಾಗ ಅವುಗಳನ್ನು ಬಳಸಲು ಸನ್ನದ್ಧ ಸ್ಥಿತಿಯಲ್ಲಿರಿಸಬೇಕು ಎಂದರು. ಬೀಚ್ ಪ್ರದೇಶದಲ್ಲಿ ತಾತ್ಕಾಲಿಕವಾಗಿ ನಿರ್ಮಿಸಿರುವ ಕಾಟೇಜು, ಹೋಟೆಲ್ಗಳಿಂದ ರಾಜಸ್ವ ಶುಲ್ಕವನ್ನು ಆಗಿಂದಾಗ್ಗೆ ವಸೂಲಿ ಮಾಡಬೇಕು. ಒಂದೊಮ್ಮೆ ಅವರ ಗುತ್ತಿಗೆ ಅವಧಿ ಮುಗಿದಲ್ಲಿ ಹೊಸದಾಗಿ ಗುತ್ತಿಗೆ ಆಧಾರದ ಮೇಲೆ ನೀಡಲು ಸಮಿತಿಯ ತೀರ್ಮಾನದಂತೆ ಕ್ರಮ ಕೈಗೊಳ್ಳಬೇಕು ಎಂದರು.
©2021 Tulunada Surya | Developed by CuriousLabs