ಮಂಗಳೂರು: ಜಿಲ್ಲೆಯ ಪ್ರತಿಯೊಬ್ಬ ರೈತರು ರೈತಸ್ನೇಹಿ ಯೋಜನೆಯಾದ ಕಿಸಾನ್ ಕ್ರೆಡಿಟ್ ಕಾರ್ಡ್ನ ಸದುಪಯೋಗ ಪಡೆಯುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಕರೆ ನೀಡಿದರು.
ಅವರು ಏ.19ರ ಮಂಗಳವಾರ ಸಂಜೆ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾಮಟ್ಟದ ವಿವಿಧ ಬ್ಯಾಂಕರುಗಳ ವಿಶೇಷ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಇದೇ ಏ.24ರಂದು ನಡೆಯುವ ಪಂಚಾಯತ್ ರಾಜ್ ದಿನದಂದು ಪ್ರಧಾನ ಮಂತ್ರಿಗಳು ಮಹಾಗ್ರಾಮ ಸಭಾ ಕಾರ್ಯಕ್ರಮದಲ್ಲಿ ಕಿಸಾನ್ ಭಾಗಿದಾರಿ, ಪ್ರಾಥಮಿಕ ಹಮಾರಿ ಎಂಬ ಬೃಹತ್ ಆಂದೋಲನಕ್ಕೆ ಚಾಲನೆ ನೀಡಲಿದ್ದಾರೆ, ಈ ಆಂದೋಲನ ಮೇ.1ರ ವರೆಗೆ ನಡೆಯಲಿದೆ ಈ ಅವಧಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪಿ.ಎಂ ಕಿಸಾನ್ ಫಲಾನುಭವಿಗಳು ಈ ಯೋಜನೆಯ ಸದುಪಯೋಗ ಪಡೆಯುವಂತೆ ತಿಳಿಸಿದರು.ಬ್ಯಾಂಕ್, ಪಂಚಾಯತ್ ಅಧಿಕಾರಿಗಳು ಸೇರಿದಂತೆ ಇತರೆ ಇಲಾಖೆಗಳ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ಅರ್ಹ ಫಲಾನುಭವಿಗಳಿ ಈ ಯೋಜನೆಯ ಬಗ್ಗೆ ಅರಿವು ಮೂಡಿಸಿ, ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ ಬೆಳೆ ಸಾಲ ಪಡೆಯಲು ಪ್ರೋತ್ಸಾಹ ನೀಡಬೇಕು, ಸಾಮಾಜಿಕ ಜಾಲತಾಣಗಳ ಮೂಲಕ ಈ ಯೋಜನೆಯ ಬಗ್ಗೆ ಪ್ರಚಾರ ಪಡಿಸಬೇಕು, ಜತೆಗೆ ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆ ಹಾಗೂ ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಭೀಮಾ ಯೋಜನೆಗಳ ಬಗ್ಗೆಯೂ ಜನರಲ್ಲಿ ಜಾಗೃತಿ ಮೂಡಿಸುವಂತೆ ತಿಳಿಸಿದರು.ಗ್ರಾಮೀಣ ಭಾಗದ ಬ್ಯಾಂಕುಗಳು, ಸಹಕಾರಿ ಸಂಘಗಳು ಈ ಬಗ್ಗೆ ಹೆಚ್ಚಿನ ಒಲವು ತೋರಿ ಜನರು ಬೆಳೆ ಸಾಲ ಪಡೆಯುವಂತೆ ಪ್ರೋತ್ಸಾಹಿಸಬೇಕು, ಪ್ರಾಥಮಿಕ ಕೃಷಿ ಪತ್ತಿನ ಬ್ಯಾಂಕುಗಳಲ್ಲಿ ಶೂನ್ಯ ಬಡ್ಡಿದರದಲ್ಲಿ ಹಾಗೂ ರಾಷ್ಟ್ರಿಕೃತ ಬ್ಯಾಂಕ್ ಮತ್ತು ಇತರೆ ಖಾಸಗೀ ಬ್ಯಾಂಕುಗಳಲ್ಲಿ ಶೇಕಡಾ 4 ರಷ್ಟು ಬಡ್ಡಿ ದರದಲ್ಲಿ ಈ ಸೌಲಭ್ಯ ದೊರೆಯಲಿದೆ ಎಂದರು.