ಮಲ್ಪೆ: ಕರ್ನಾಟಕ ರಾಜ್ಯೋತ್ಸವದ ಪೂರ್ವಭಾವಿಯಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ದ. ಕ.ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಮತ್ತು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಮಲ್ಪೆ ಮೀನುಗಾರರ ಸಂಘದ ಸಹಕಾರದೊಂದಿಗೆ ಅ. 28ರ ಬೆಳಗ್ಗೆ 10ಕ್ಕೆ ಮಲ್ಪೆ ಅರಬಿ ಸಮುದ್ರದ ಮಧ್ಯೆ ಕೋಟಿ ಕಂಠ ಗಾಯನ ಕಾರ್ಯಕ್ರಮ ನಡೆಯಲಿದೆ.
ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಅವರ ಕಲ್ಪನೆಯ ನನ್ನ ನಾಡು ನನ್ನ ಹಾಡು ಕೋಟಿ ಕಂಠ ಗಾಯನ ಅಭಿಯಾನಕ್ಕೆ ಈ ಕಾರ್ಯಕ್ರಮ ಮೆರುಗು ನೀಡಲಿದೆ. ಶಾಲಾ ವಿದ್ಯಾರ್ಥಿಗಳು, ಮೀನುಗಾರರು, ಜನಪ್ರತಿನಿಧಿಗಳು, ಜಿಲ್ಲಾಡಳಿತದ ಅಧಿಕಾರಿಗಳು, ಮಾಧ್ಯಮ ಪ್ರತಿನಿಧಿಗಳು, ಸಂಗೀತ ಕಲಾವಿದರು ಹಾಗೂ ವಿವಿಧ ಕ್ಷೇತ್ರಗಳ ಗಣ್ಯರ ಉಪಸ್ಥಿತಿಯಲ್ಲಿ ಕನ್ನಡ ಗೀತೆಗಳ ಗಾಯನದ ಮೂಲಕ ಕಾರ್ಯಕ್ರಮ ನಡೆಯಲಿದೆ ಎಂದು ಮೀನು ಮಾರಾಟ ಫೆಡರೇಶನಿನ ಅಧ್ಯಕ್ಷ ಯಶ್ಪಾಲ್ ಸುವರ್ಣ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
