ಮಂಗಳೂರು: ರಾಷ್ಟ್ರಧ್ವಜವನ್ನು ಮನೆಗಳು, ಕಟ್ಟಡಗಳ ಮೇಲ್ಗಡೆ ಹಾರಾಟ ಮಾಡಲು ಯಾವುದೇ ತೊಂದರೆಯಿಲ್ಲ. ಆದರೆ ಧ್ವಜಸಂಹಿತೆಯನ್ನು ಪಾಲಿಸದಿದ್ದಲ್ಲಿ ಮಾತ್ರ ಪ್ರಕರಣ ದಾಖಲಿಸಲಾಗುತ್ತದೆ. ಅಲ್ಲದೆ ಜೈಲು ಶಿಕ್ಷೆ ಶತಸಿದ್ಧ ಎಂದು ದ.ಕ.ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಮಂಗಳೂರಿನ ದ.ಕ.ಜಿಪಂನಲ್ಲಿ ಮಾತನಾಡಿದ ಅವರು, ಧ್ವಜ ಸಂಹಿತೆಯ ಪ್ರಕಾರ ರಾಷ್ಟ್ರಧ್ವಜಕ್ಕೆ ಅಗೌರವ ತೋರುವುದು, ನಾಶ ಪಡಿಸುವುದು, ಅಪಕೀರ್ತಿ ತರುವಂತೆ ಮಾಡುವುದು, ಹರಿದು ಹಾಕುವುದು ಇಂತಹ ಕೃತ್ಯ ಎಸಗಿದ್ದಲ್ಲಿ ಕ್ರಿಮಿನಲ್ ಕೇಸ್ ದಾಖಲಿಸಲು ಅವಕಾಶ ಇದೆ. ಇದಕ್ಕೆ ಯಾರ ಅನುಮತಿಗೂ ಕಾಯಬೇಕಿಲ್ಲ. ಯಾರೇ ನಾಗರಿಕರು ಈ ಬಗ್ಗೆ ದೂರು ನೀಡಿದರೂ ಪೊಲೀಸರು ಕ್ರಿಮಿನಲ್ ಕೇಸು ದಾಖಲಿಸಿ ಜೈಲಿಗಟ್ಟಲು ಅವಕಾಶ ಇದೆ ಎಂದರು.
ಕೃತ್ಯ ಎಸಗಿರುವುದು ಸಾಬೀತಾದಲ್ಲಿ ಕನಿಷ್ಠ 3 ವರ್ಷಗಳ ಕಾಲ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ. ಹಾಗಾಗಿ ಆ.13ರಿಂದ 15ರವರೆಗೆ ಧ್ವಜಾರೋಹಣ ಮಾಡಿ ಇಳಿಸಿದ ಬಳಿಕ ಧ್ವಜವನ್ನು ಎಸೆಯದೆ, ಜೋಪಾನವಾಗಿ ಮನೆಯಲ್ಲೇ ಇರಿಸಬೇಕು ಎಂದು ಡಾ. ಕುಮಾರ್ ಹೇಳಿದರು.