ಶೀಘ್ರವೇ ಪೊಲೀಸ್ ಸಬ್ ಇನ್ ಸ್ಪೆಕ್ಟರ್ (ಪಿಎಸ್ ಐ) ಮರು ಪರೀಕ್ಷೆ ನಡೆಸಲಾಗುವುದು ಎಂದು ಗೃಹ ಸಚಿವ ಅರಗಜ್ಞಾನೇಂದ್ರ ಹೇಳಿದ್ದಾರೆ. ಪಿಎಸ್ ಐ ನೇಮಕಾತಿ ಹಗರಣದ ತನಿಖೆ ಮುಗಿಯುತ್ತಿದ್ದಂತೆ ಮರು ಪರೀಕ್ಷೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಪಿಎಸ್ ಐ ನೇಮಕಾತಿ ಅಕ್ರಮದ ತನಿಖೆ ತ್ವರಿತಗತಿಯಲ್ಲಿ ನಡೆಯುತ್ತಿದೆ. ಪ್ರಕರಣದಲ್ಲಿ ಎಷ್ಟೇ ಪ್ರಭಾವಿಗಳು ಇದ್ದರೂ ಬಿಡುವುದಿಲ್ಲ. ಪೊಲೀಸರನ್ನು ಕೂಡ ತನಿಖೆಗೆ ಒಳಪಡಿಸಲಾಗಿದೆ ಎಂದಿದ್ದಾರೆ.
ಅಗಸ್ಟ್ 3, 2021ರಂದು 545 ಪಿಎಸ್ ಐ ಹುದ್ದೆಗಳಿಗೆ ನೇಮಕಾತಿ ಪರೀಕ್ಷೆ ನಡೆದಿತ್ತು. ಈ ಪರೀಕ್ಷೆಯಲ್ಲಿ ಭಾರೀ ಅಕ್ರಮ ನಡೆದಿರುವ ಹಿನ್ನೆಲೆ ತನಿಖೆ ನಡೆಯುತ್ತಿದೆ. ಹಲವಾರು ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ. ಇನ್ನೂ ಕೂಡ ಆರೋಪಿಗಳ ಬಂಧನವಾಗುತ್ತಲೇ ಇದೆ. ಅಕ್ರಮ ಬಯಲಾಗುತ್ತಿದ್ದಂತೆ ಸರ್ಕಾರ ನೇಮಕಾತಿ ರದ್ದುಗೊಳಿಸಿ ಮರು ಪರೀಕ್ಷೆಗೆ ಆದೇಶಿಸಿದೆ.