ಬಂಟ್ವಾಳ: ಕೆಲ ದಿನಗಳ ಹಿಂದೆ ಬಿ.ಸಿ.ರೋಡಿನಲ್ಲಿ ಸ್ಕೂಟರ್ ನಲ್ಲಿ ಸಂಚರಿಸುತ್ತಿದ್ದ ವೇಳೆ ಸ್ಕಿಡ್ ಆಗಿ ಗಾಯಗೊಂಡಿದ್ದ ನಿವೃತ್ತ ಹೆಲ್ತ್ ಇನ್ಸ್ ಪೆಕ್ಟರ್ , ಬಿ.ಸಿ.ರೋಡ್ ನಿವಾಸಿ ಸುರೇಂದ್ರ ಮಯ್ಯ (71) ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಪತ್ನಿ ನಿವೃತ್ತ ಮುಖ್ಯ ಶಿಕ್ಷಕಿ ಇಂದಿರಾ ಹಾಗೂ ಇಬ್ಬರು ಪುತ್ರರನ್ನು ಅವರು ಅಗಲಿದ್ದಾರೆ. ಬಂಟ್ವಾಳ ತಾಲೂಕಿನ ವಿವಿಧ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸುಮಾರು 37 ವರ್ಷಗಳ ಕಾಲ ಕರ್ತವ್ಯ ಸಲ್ಲಿಸಿದ್ದ ಅವರು ಫೆ.6ರಂದು ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರ ಮುಂಭಾಗ ಸ್ಕೂಟರ್ ನಲ್ಲಿ ಮನೆ ಕಡೆ ಹೋಗುತ್ತಿದ್ದ ವೇಳೆ ಸ್ಕಿಡ್ ಆಗಿತ್ತು.
ಕೂಡಲೇ ಅವರನ್ನು ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.