ಬೆಂಗಳೂರು: ರಾಜ್ಯದ ಸರಕಾರಿ ಮತ್ತು ಅನುದಾನಿತ ಶಾಲಾ-ಕಾಲೇಜುಗಳ ಪ್ರೌಢಾವಸ್ಥೆಯ ವಿದ್ಯಾರ್ಥಿನಿಯರಿಗೆ ಸ್ಯಾನಿಟರಿ ನ್ಯಾಪ್ ಕಿನ್ ಸೇರಿ ನೈರ್ಮಲ್ಯ ಹಾಗೂ ಶುಚಿತ್ವದ ವಸ್ತುಗಳನ್ನು ಪೂರೈಸುವ ಶುಚಿ ಯೋಜನೆ ಅನುಷ್ಠಾನದ ಬಗ್ಗೆ ನಿರ್ಲಕ್ಷ ವಹಿಸುತ್ತಿರುವ ರಾಜ್ಯ ಸರಕಾರದ ವಿರುದ್ಧ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.
ಶುಚಿ ಯೋಜನೆ ಕೇವಲ ಕಾಗದಗಳಲ್ಲಿ ಉಳಿದುಕೊಂಡಿದೆ. ಸರಕಾರ ಈ ರೀತಿ ನಡೆದುಕೊಂಡರೆ ಹೆಣ್ಣು ಮಕ್ಕಳ ಶಿಕ್ಷಣ ಮತ್ತು ಸಬಲೀಕರಣದ ಗುರಿ ಸಾಧಿಸಲು ಸಾಧ್ಯವಾಗುವುದಿಲ್ಲ. ಹೀಗಾಗಿ, ಶುಚಿ ಯೋಜನೆಯ ಅನುಷ್ಠಾನದ ಪ್ರಗತಿ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರು ಖುದ್ದು ನ್ಯಾಯಾಲಯದ ಮುಂದೆ ಹಾಜರಾಗಿ ವಿವರಣೆ ನೀಡಲಿ ಎಂದು ನ್ಯಾಯಪೀಠ ಆದೇಶಿಸಿದೆ. ವಿಚಾರಣೆಯನ್ನು ಆ.5 ಕ್ಕೆ ಮುಂದೂಡಿದೆ.