ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಟೋಲ್ ಗೇಟ್ ನಿಂದ ಉಂಟಾಗುತ್ತಿರುವ ಕಿರಿಕಿರಿ ವಿರುದ್ಧ ಜನ ಸಿಡಿದೆದ್ದಿದ್ದಾರೆ. ಮಂಗಳೂರು ಹೊರವಲಯದ ಸುರತ್ಕಲ್ ಎನ್ಐಟಿಕೆ ಬಳಿ ಟೋಲ್ ಸಂಗ್ರಹಕ್ಕೆ ಆರಂಭದಿಂದಲೂ ಅಪಸ್ವರ ಇತ್ತು. ಸುರತ್ಕಲ್ ಎನ್ಐಟಿಕೆ ಟೋಲ್ ಗೇಟ್ ಮತ್ತು ಉಡುಪಿಯ ಹೆಜಮಾಡಿ ಟೋಲ್ ಗೇಟ್ ನಡುವೆ ಕಡಿಮೆ ಅಂತರವಿದೆ. ಹಾಗಾಗಿ, ಎರಡು ಕಡೆ ಟೋಲ್ ಸಂಗ್ರಹ ಯಾಕೆ ಎಂಬುವುದು ಜನರ ಪ್ರಶ್ನೆಯಾಗಿದೆ. ಈ ಹಿಂದೆ ಹಲವು ಬಾರಿ ಟೋಲ್ ಗೇಟ್ ತೆರವಿಗೆ ಆಗ್ರಹಿಸಿ ಪ್ರತಿಭಟನೆಗಳು ನಡೆದಿವೆ. ಶಾಸಕರು, ಸಂಸದರ ಬಳಿಯೂ ಮನವಿ ಸಲ್ಲಿಸಲಾಗಿದೆ. ಆದರೆ, ಯಾವುದೇ ಪ್ರಯೋಜನ ಆಗಿಲ್ಲ.
ಹಾಗಾಗಿ, ಸುರತ್ಕಲ್ ಎನ್ಐಟಿಕೆ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಇಂದು (22ಮಾರ್ಚ್ 2022) ‘ಎನ್ಐಟಿಕೆ ಟೋಲ್ ಗೇಟ್ ಚಲೋ’ ಎಂಬ ಬೃಹತ್ ಜಾಥಾ ಹಮ್ಮಿಕೊಂಡಿದೆ. ಬೃಹತ್ ಜಾಥಾಕ್ಕೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವಿವಿಧ ಸಂಘ-ಸಂಸ್ಥೆಗಳು ಬಿತ್ತಿಪತ್ರ ಪ್ರದರ್ಶನ ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಜನಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಮಾಡಿವೆ. ಅಲ್ಲದೆ, ಜಾಥಾಕ್ಕೆ ಸಂಬಂಧಿಸಿದಂತೆ ನೂರಕ್ಕೂ ಅಧಿಕ ಸಂಘ- ಸಂಸ್ಥೆಗಳನ್ನು ಒಗ್ಗೂಡಿಸಿ ಹಲವು ಸುತ್ತಿನ ಸಭೆಗಳನ್ನು ನಡೆಸಲಾಗಿದೆ. ಇಂದು ಬೆಳಗ್ಗೆ 9.30ಕ್ಕೆ ಹೆಜಮಾಡಿ ಟೋಲ್ ಗೇಟ್ ನಿಂದ ಆರಂಭಗೊಳ್ಳುವ ಬೃಹತ್ ಜಾಥಾವು, ಮಧ್ಯಾಹ್ನ 1 ಗಂಟೆಯ ಸುಮಾರಿಗೆ ಸುರತ್ಕಲ್ ಎನ್ಐಟಿಕೆ ಟೋಲ್ ಗೇಟ್ ತಲುಪಲಿದೆ. ಬಳಿಕ ಸಮಾರೋಪ ಕಾರ್ಯಕ್ರಮ ನಡೆಯಲಿದೆ.